• August 23, 2025
  • Last Update August 21, 2025 9:01 pm
  • Australia

ಸರ್ಕಾರಿ ಸ್ಥಳದಲ್ಲಿದ್ದ ಮನೆ ತೆರವು

ಸರ್ಕಾರಿ ಸ್ಥಳದಲ್ಲಿದ್ದ ಮನೆ ತೆರವು

ಕಡಬ: ಸರಕಾರಿ ಜಾಗದಲ್ಲಿ ನಿರ್ಮಿಸಲಾಗಿದೆ ಎಂದು ವೃದ್ಧ ದಂಪತಿ ಆರು ವರ್ಷಗಳಿಂದ ವಾಸವಿದ್ದ ಮನೆಯನ್ನು ತಾಲೂಕು ಕಂದಾಯ ಅಧಿಕಾರಿಗಳು ನೆಲಸಮಗೊಳಿಸಿದ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಎಂಬಲ್ಲಿ ಬುಧವಾರ ನಡೆದಿದೆ.

ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿ ವಾಸವಿದ್ದ ಮನೆಯನ್ನು ಏಕಾಏಕಿ ಧ್ವಂಸಗೊಳಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಹಟ್ಟಿ ಮೂಲದವರಾದ ಈ ದಂಪತಿ ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿದ್ದರು‌. ಬಳಿಕ ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಕಳೆದ 6 ವರ್ಷಗಳಿಂದ ವಾಸಿಸುತ್ತಿದ್ದರು. ಈ ದಂಪತಿಗೆ ಯಾವುದೇ ಪಿತ್ರಾರ್ಜಿತ ಆಸ್ತಿಯಿರಲಿಲ್ಲ. ಆದ್ದರಿಂದ ಕಾಪಿನಬಾಗಿಲು ಎಂಬಲ್ಲಿನ ಸರಕಾರಿ ಜಾಗದಲ್ಲಿ ಸಣ್ಣ ಮನೆ ಕಟ್ಟಿಕೊಂಡಿದ್ದರು.

ಈ ದಂಪತಿ ಸರಕಾರಿ ಜಾಗದಲ್ಲಿ ಮನೆ ನಿರ್ಮಿಸಿದ್ದರಿಂದ, ಇದರ ವಿರುದ್ಧ ಬೆಳ್ತಂಗಡಿ ತಾಲೂಕಿನ ಅಶೋಕ್‌ ಆಚಾರ್ಯ ಎಂಬವರು ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು. ಈ ಹಿನ್ನೆಲೆಯಲ್ಲಿ ಸರಕಾರಿ ಜಾಗವನ್ನು ತೆರವುಗೊಳಿಸಲು ಹೈಕೋರ್ಟ್‌ ಸೂಚನೆ ನೀಡಿದ್ದರಿಂದ ಕಳೆದ ಫೆಬ್ರವರಿಯಲ್ಲೇ ಮನೆ ತೆರವಿಗೆ ಅಧಿಕಾರಿಗಳು ಮುಂದಾಗಿದ್ದರು. ಆದರೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮನೆ ಕೆಡವದೆ ವಾಪಸ್ಸಾಗಿದ್ದರು. ಇಂದು ದಿಢೀರ್ ಆಗಮಿಸಿದ ಅಧಿಕಾರಿಗಳು ಜೇಸಿಬಿ ಯಂತ್ರದ ಬಳಸಿ ಮನೆಯ ಸಾಮಗ್ರಿಗಳನ್ನೆಲ್ಲ ಹೊರಗಿಟ್ಟು ಮನೆಯನ್ನು ಕೆಡವಿ ಹಾಕಿದ್ದಾರೆ.

ಕಡಬ ತಹಶೀಲ್ದಾ‌ರ್ ಪ್ರಭಾಕರ ಖಜೂರೆ, ಆರ್‌ಐ ಪೃಥ್ವಿರಾಜ್, ಉಪ್ಪಿನಂಗಡಿ ಪೊಲೀಸರ ನೇತೃತ್ವದಲ್ಲಿ ಮನೆ ತೆರವು ಮಾಡಲಾಗಿದೆ.

administrator

Related Articles

Leave a Reply

Your email address will not be published. Required fields are marked *

error: Content is protected !!