ಉಡುಪಿ: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ರಾಷ್ಟ್ರಗೀತೆ ‘ವಂದೇ ಮಾತರಂ’ ಕುರಿತು ನೀಡಿದ್ದಾರೆ ಎನ್ನಲಾದ ಹೇಳಿಕೆಯನ್ನು ಖಂಡಿಸಿ, ಅವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ (Suo Motu Case) ದಾಖಲಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಹಾಗೂ ಯುವಮೋರ್ಚಾ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.
ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಅವರ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿಯಾದ ನಿಯೋಗವು ಬಿ.ಕೆ. ಹರಿಪ್ರಸಾದ್ ವಿರುದ್ಧ ದೂರು ನೀಡಿತು.
ರಾಷ್ಟ್ರ ಗೌರವಕ್ಕೆ ಧಕ್ಕೆ ಆರೋಪ “ವಂದೇ ಮಾತರಂ ಗೀತೆಗೆ ಕೇಂದ್ರ ಸರ್ಕಾರ ಹಾಗೂ ಸಂಸತ್ತು ಈಗಾಗಲೇ ರಾಷ್ಟ್ರಗೀತೆಯ ಗೌರವ ನೀಡಿ ಅನುಮೋದಿಸಿದ್ದು, ರಾಷ್ಟ್ರಪತಿಗಳ ಅಂಕಿತವೂ ದೊರೆತಿದೆ. ಇಂತಹ ಗೌರವಾನ್ವಿತ ಗೀತೆಯನ್ನು ‘ಸಂಪೂರ್ಣವಾಗಿ ಹಾಡುವುದಿಲ್ಲ’ ಎಂದು ಹೇಳಿಕೆ ನೀಡುವುದು ಭಾರತದ ಸಂವಿಧಾನ ಮತ್ತು ರಾಷ್ಟ್ರೀಯ ಗೌರವಕ್ಕೆ ಎಸಗಿದ ಅಪಮಾನವಾಗಿದೆ. ಈ ಹೇಳಿಕೆಯು ದೇಶವಿರೋಧಿ ಸ್ವರೂಪದ್ದಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ಬಿಜೆಪಿ ನಾಯಕರು ಆಗ್ರಹಿಸಿದರು.
ಪ್ರಮುಖ ನಾಯಕರ ಉಪಸ್ಥಿತಿ ಈ ಸಂದರ್ಭದಲ್ಲಿ ರಾಜ್ಯ ಯುವಮೋರ್ಚಾ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಅಭಿರಾಜ್ ಸುವರ್ಣ, ಪ್ರದೀಪ್ ಕುಂದರ್, ಜಿಲ್ಲಾ ಉಪಾಧ್ಯಕ್ಷರಾದ ಗುರುರಾಜ್ ಮಾಡ, ಪ್ರಥ್ವಿರಾಜ್ ಮಣಿಪಾಲ್ ಹಾಗೂ ಸಚಿನ್ ಪಿತ್ರೋಡಿ ಉಪಸ್ಥಿತರಿದ್ದರು.
ಅಲ್ಲದೆ, ಮಂಡಲ ಯುವಮೋರ್ಚಾ ಅಧ್ಯಕ್ಷರುಗಳಾದ ಶ್ರೀವತ್ಸ, ಸೋನು ಪಾಂಗಳ, ಸುಶಾಂತ್ ಪೂಜಾರಿ ಸೇರಿದಂತೆ ಪಕ್ಷದ ಪ್ರಮುಖ ಕಾರ್ಯಕರ್ತರು ಈ ನಿಯೋಗದಲ್ಲಿದ್ದರು.





